ದಾಂಡೇಲಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಗೆ ಸಂಬಂಧಪಟ್ಟಂತೆ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಅಧ್ಯಕ್ಷತೆಯಲ್ಲಿ ತಾಲೂಕ ಆಡಳಿತ ಸೌಧದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.
ಸಭೆಯಲ್ಲಿ ಪ್ರಮುಖರಾದ ಚಂದ್ರಕಾಂತ ನಡಿಗೇರ, ಸತೀಶ್ ನಾಯ್ಕ, ಶ್ರೀಕಾಂತ್ ಅಸೋದೆ, ರವಿ ಮಾಳಕರಿ, ಅವಿನಾಶ ಘೋಡಕೆ, ದೇವೇಂದ್ರ ಮಾದರ, ಅಶೋಕ ಮುಂತಾದವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿ ಮೆರವಣಿಗೆಯ ಜೊತೆಯಲ್ಲಿ ವೇದಿಕೆ ಕಾರ್ಯಕ್ರಮದೊಂದಿಗೆ ನಡೆಸುವಂತೆ ಆಗಬೇಕು. ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸುವಂತಾಗಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಎನ್. ವಾಸರೆ, ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಎಂ. ಡಿ. ಒಕ್ಕುಂದ, ಬಂಗೂರನಗರ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎಲ್. ಗುಂಡೂರ್, ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ್ ರಾಮರಥ ಮುಂತಾದವರು ಮಾತನಾಡಿ ಕಾರ್ಯಕ್ರಮ ಸಂಘಟನೆಯ ಕುರಿತಂತೆ ಸಲಹೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಶೈಲೇಶ್ ಪರಮಾನಂದವರು ಮಾತನಾಡಿ ಸಂವಿಂದಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ನಮ್ಮೆಲ್ಲರ ಕರ್ತವ್ಯ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಕಾರ್ಯಕ್ರಮವನ್ನು ದಾಂಡೇಲಿಯಲ್ಲಿ ಆಚರಿಸಲಾಗುತ್ತದೆ. ಮುಂಜಾನೆ 9 ಗಂಟೆಗೆ ಕಿತ್ತೂರು ಚನ್ನಮ್ಮ ವೃತ್ತದಿಂದ ನಗರಸಭೆಯವರೆಗೆ ಮೆರವಣಿಗೆ, ನಂತರ ಅಂಬೇಡ್ಕರ ಪುತ್ಥಳಿಗೆ ಹಾರಾರ್ಪಣೆ, ನಂತರ ನಗರ ಸಭೆಯ ಆವರಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿ ಈ ಕಾರ್ಯಕ್ರಮದಲ್ಲಿ ಸಂಘಟನೆಯವರು , ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.
ಸಭೆಯಲ್ಲಿ ದಾಂಡೇಲಿ ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ , ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪವಾರ್, ನಗರ ಠಾಣೆಯ ಪಿಎಸ್ಐ ಅಮೀನ್ ಅತ್ತಾರ್ ಮುಂತಾದವರು ಉಪಸ್ಥಿತರಿದ್ದರು.
ನಗರದ ವಿವಿಧ ದಲಿತ ಸಂಘಟನೆಗಳ ಪ್ರಮುಖರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
Be the first to comment